ಕಾಸರಗೋಡು: ಜಿಲ್ಲೆಯಲ್ಲಿ ಕಳೆದ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಶನಿವಾರ ಸಂಜೆಯಿಂದ ಮಳೆಯ ತೀವ್ರತೆ ಹೆಚ್ಚಾಗಿದ್ದು, ವಿವಿಧೆಡೆ ವಿದ್ಯುತ್ ಸಂಪರ್ಕ ವ್ಯತ್ಯಯಗೊಂಡಿದೆ. ಹಲವೆಡೆ ವಿದ್ಯುತ್ ಕಂಬಗಳು ಉರುಳಿವೆ, ತಡೆಗೋಡೆಗಳು ಕುಸಿದು ಹೋಗಿವೆ. ಹಾಗೂ ಕೆಲವು ಕಡೆಗಳಲ್ಲಿ ಗುಡ್ಡ ಕುಸಿತ ಮರ ಬಿದ್ದು ಹಲವೆಡೆ ಹಾನಿ ಸಂಭವಿಸಿದೆ. ಕೃಷಿಗೆ ಭಾರೀ ಹಾನಿಯಾಗಿರುವ ವರದಿಗಳು ಕೂಡ ಕೇಳಿ ಬಂದಿವೆ.
ಈ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಜಿಲ್ಲೆಗೆ ಸೋಮವಾರ ‘ರೆಡ್ ಅಲರ್ಟ್’ ಘೋಷಿಸಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು, ಟ್ಯೂಷನ್ ಮತ್ತು ಅಂಗನವಾಡಿ ಕೇಂದ್ರಗಳು ಹಾಗೂ ಮದ್ರಸೆಗಳಿಗೆ ರಜೆ ಘೋಷಿಸಿದೆ.
ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಈ ಕುರಿತು ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್ ಅವರು ಸ್ಪಷ್ಟ ಆದೇಶ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಸ್ಪಷ್ಟೀಕರಣದಂತೆ, ಪೂರ್ವಭಾವಿ ನಿರ್ಧರಿತ ಪರೀಕ್ಷೆಗಳು ನಿಗದಿಪಡಿಸಿದ ದಿನಾಂಕದಲ್ಲಿಯೇ ನಡೆಯಲಿದ್ದು ಯಾವುದೇ ಬದಲಾವಣೆಯಿರುವುದಿಲ್ಲ. ಸಾರ್ವಜನಿಕರು ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ನಿರ್ದಿಷ್ಟವಾದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ.