ಸಕಲೇಶಪುರ: ಸಕಲೇಶಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಡಿ ಒಂದೇ ದಿವಸದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ನಗರದ ಕುಶಾಲನಗರ ಬಡಾವಣೆಯಲ್ಲಿ ಅಕ್ರಮವಾಗಿ ಗೋವು ಹತ್ಯೆ ಮಾಡಿ 120 ಕೆ.ಜಿ.ಷ್ಟು ಗೋಮಾಂಸವನ್ನು ಕಟಾವು ಮಾಡಿಟ್ಟುಕೊಂಡು ಮಾರಾಟಕ್ಕೆ ಸಿದ್ಧಪಡಿಸುತ್ತಿದ್ದ ಕುಶಾಲನಗರದ ಯಾಸೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯ ಕೋಣೆಯನ್ನು ಕಸಾಯಿಖಾನೆಯಂತೆ ಪರಿವರ್ತಿಸಿದ್ದ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ, ಅಜಾದ್ ರಸ್ತೆ ಬಳಿ ಅತಿಕ್ ಖುರೇಷಿ ಎಂಬಾತನು ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಎಂಬುದಾಗಿ ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು, ವಾಹನದೊಂದಿಗೆ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಇವರಿಬ್ಬರ ವಿರುದ್ಧವೂ ಗೋಹತ್ಯೆ ನಿಷೇಧ ಕಾಯ್ದೆಯಡಿ (Karnataka Prevention of Slaughter and Preservation of Cattle Act) ಪ್ರತ್ಯೇಕವಾಗಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿಯೊಂದಿಗೆ ಪಶು ವೈದ್ಯಾಧಿಕಾರಿ ಹಾಗೂ ಪುರಸಭೆಯ ಅಧಿಕಾರಿಗಳು ಸಹ ಭಾಗಿಯಾಗಿದ್ದರು.