ಬಂಟ್ವಾಳ: ಪಾಣೆಮಂಗಳೂರು ಅಕ್ಕರಂಗಡಿಯಲ್ಲಿ ಯುವಕನ ಮೇಲೆ ಚಾಕುವಿನಿಂದ ಇರಿತ!

  • 17 May 2025 04:01:50 PM


ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ ನಿಲ್ದಾಣದ ಸಮೀಪ ಶನಿವಾರ ರಾತ್ರಿ ಭಯಾನಕ ಘಟನೆಯೊಂದು ಸಂಭವಿಸಿದೆ.

 

 ಅಕ್ಕರಂಗಡಿ ನಿವಾಸಿ ಹಮೀದ್ ಯಾನೆ ಅಮ್ಮಿ ಎಂಬುವವರ ಮೇಲೆ ನಾಲ್ವರು ದುಷ್ಕರ್ಮಿಗಳ ತಂಡ ಚಾಕುವಿನಿಂದ ದಾಳಿ ನಡೆಸಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.

 

ಹಮೀದ್ ಅವರು ರಸ್ತೆ ಬದಿ ನಿಂತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಅವರ ಮೇಲೆ ಆಚಾನಕ್ ದಾಳಿ ನಡೆಸಿ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ. 

 

ಅವರ ಕೈಗೆ ಆಳವಾದ ಗಾಯ ಉಂಟಾಗಿದೆ. ತಕ್ಷಣದ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

 

ದಾಳಿಯ ಹಿನ್ನೆಲೆಯಲ್ಲಿ ವೈಯಕ್ತಿಕ ದ್ವೇಷವೇ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ದಾಳಿಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ಸಂಬಂಧ ತನಿಖೆ ಪ್ರಾರಂಭಿಸಿದ್ದಾರೆ.

 

ಇತ್ತೀಚೆಗೆ ಸಂಭವಿಸಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬಳಿಕ ಶಾಂತ ವಾತಾವರಣಕ್ಕೆ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಘಟನೆ ಮತ್ತೆ ಆತಂಕ ಸೃಷ್ಟಿಸಿದೆ.

 

ಹಲ್ಲೆ ನಡೆಸಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.