ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ ಸಂಜೆಯಿಂದ ಆರಂಭವಾದ ಭಾರೀ ಗಾಳಿ ಮಳೆಯಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ.
ಹಲವು ಭಾಗಗಳಲ್ಲಿ ರಸ್ತೆಗಳು ಕೊಚ್ಚಿ ಹೋಗಿದ್ದು ಮತ್ತು ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದಿರುವುದರಿಂದ ಸಂಚಾರ ಮತ್ತು ವಿದ್ಯುತ್ ಪೂರೈಕೆ ಮೇಲೆ ಭಾರಿ ಪರಿಣಾಮ ಬೀರಿದೆ.
ಕರಂದಕ್ಕಾಡ್ ಮತ್ತು ಚೆರ್ಕಳ ಪ್ರದೇಶದಲ್ಲಿ ಸರ್ವಿಸ್ ರಸ್ತೆಗಳ ಮೇಲೆ ಮರ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಗಳ ಸ್ಥಿತಿ ತೀವ್ರವಾಗಿ ಹದಗೆಡುತ್ತಿದ್ದು, ನೀರು ತುಂಬಿರುವುದು ಹಾಗೂ ರಸ್ತೆ ಕುಸಿದಿರುವ ಕಾರಣ ಬಹುತೇಕ ಕಡೆಗಳಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಲಘು ವಾಹನಗಳು ಮಾತ್ರ ಸಂಚರಿಸುತ್ತಿದ್ದು, ಘನ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲದ ಪರಿಸ್ಥಿತಿ ಉಂಟಾಗಿದೆ.
ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮರಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದು ಜನರ ಸುರಕ್ಷತಿಗಾಗಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ಅತೀ ಅವಶ್ಯಕತೆ ಇಲ್ಲದೆ ಈ ರಸ್ತೆಗಳನ್ನು ಬಳಸದೇ ಇರಬೇಕೆಂದು ಸೂಚನೆ ನೀಡಿರುತ್ತಾರೆ.
ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜನತೆಗೆ ಎಚ್ಚರಿಕೆಯಿಂದ ಇರಬೇಕೆಂದು ಮನವಿ ಮಾಡಲಾಗಿದೆ.